Friday, November 27, 2009

ಶಾಪ


3 ದಿನಗಳಿಂದಲೂ ಒಂದೇ ತೆರನಾಗಿ ಬೀಳುವ ಮಳೆಯನ್ನೂ ಲೆಕ್ಕಿಸದೆ ಜಾನಕಿ ಕೊರಂಬು ತಲೆಗೇರಿಸಿ, ಮೊಣಗಂಟಿನವರೆಗೂ ಸೀರೆಯನ್ನು ಮೇಲಕ್ಕೆತ್ತಿ, ಲೋಟ ಹಿಡಿದ ಕೈಗಳನ್ನು ಚಳಿಗೆ ಎದೆಯ ಒಳಗಿರಿಸಿಕೊಂಡು ವೆಂಕಟ ಭಟ್ಟರ ಜಾರುವ ಅಂಗಳಕ್ಕೆ ಕಾಲಿಟ್ಟಾಗ ಮುಸ್ಸಂಜೆಯ ಹೊತ್ತು ಹಲಸಿನ ಹಪ್ಪಳ ಮೆಲ್ಲುತ್ತಿದ್ದ ಭಟ್ಟರಿಗೆ ಆಶ್ಚರ್ಯವಾಯಿತು. ತಮ್ಮ ಪಕ್ಕದಲ್ಲಿಯೆ ಕುಳಿತು ಕರಿದ ತೆಳುವಾದ ಹಪ್ಪಳಗಳನ್ನು ಆರಿಸುತ್ತಿದ್ದ ಮಗನಿಗೆ ಹೇಳಿದರು.
"ಮಾಣಿ, ಹೋಗು ಆ ಕೆಳಗಿನ ಮನೆಯ ಹೆಂಗಸು ಬಂದಿದೆ. ಚಳಿಗೆ ನಡುಗುತ್ತಾ ನಿಂತಿದೆ. ಅದಕ್ಕೆ ಕೇಳಿ ತೆಗೆದುಕೊಳ್ಳುವುದಕ್ಕೆ ಹೊತ್ತು ಗೊತ್ತು ಇಲ್ಲ. ಬಾಗಿಲು ತೆಗಿ" ಭಟ್ಟರ ಮಗ ರಮಣ ಆರಿಸಿದ ಹಪ್ಪಳವನ್ನು ಹಾಗೇ ಕೈಯಲ್ಲಿ ಹಿಡಿದುಕೊಂಡು ಮಳೆಗೆ ಗಚ್ಚನೆ ಮುಚ್ಚಿದ ಬಾಗಿಲಿನ ಚಿಲಕ ತೆಗೆದು ಎಳೆದ.


ಚಳಿಗೆ ನಡುಗುತ್ತಿದ್ದ ಹೆಂಗಸು, " ಮಾಣಿ, ಅಮ್ಮ ಮನೆಯಲ್ಲಿ ಇಲ್ವಾ?" ಅಂದಾಗ ರಮಣ, "ಇದ್ದಾರೆ" ಅನ್ನುತ್ತಾ ಇಡೀ ಹಪ್ಪಳಕ್ಕೆ ಬಾಯಿ ಹಚ್ಚಿದ.
ಒಳಗೆ ಬಂದು ಗೋಡೆಗೆ ಒರೆಸಿಕೊಂಡಂತೆ ಕುಕ್ಕರುಗಾಲಿನಲ್ಲಿ ಕುಳಿತ ಹೆಂಗಸು, ಹಪ್ಪಳ ಕರಿದ ತೆಂಗಿನೆಣ್ಣೆಯ ಪರಿಮಳ ಮೂಗಿಗೆ ನಾಟುತ್ತಲೇ, ಅಡುಗೆ ಮನೆಯತ್ತ ಮುಖ ಹೊರಳಿಸಿತು.
"ಏನು ಜಾನಕಮ್ಮ, ಈ ಹೊತ್ತಿನಲ್ಲಿ? ಮಳೆಗೆ ತಲೆ ಹೊರಗೆ ಹಾಕುವುದು ಬೇಡ ಅನ್ನುವಷ್ಟು ಬೇಜಾರು. ಮೈ, ಕೈಯೆಲ್ಲಾ ಒದ್ದೆ ಮಾಡಿಕೊಂಡು ಬಂದಿದ್ದೀರಲ್ಲಾ, ಏನು ಕಥೆ?" ಹಪ್ಪಳದ ತಟ್ಟೆಯನ್ನು ಮಗನ ಕಡೆಗೆ ನೂಕಿ ಕುಳಿತಿದ್ದ ಹೆಂಗಸನ್ನು ಕೇಳಿದರು ಭಟ್ಟರು.
"ಭಟ್ರೆ, ಒಲೆ ಉರಿಸೋದೆ ಕಷ್ಟ ಆಗಿದೆ. ಒಟ್ಟು ಮಾಡಿಟ್ಟ ಕಟ್ಟಿಗೆಗೆ ಪಸೆ ಬಂದಿದೆ. ಗಂಜಿಯೇನೋ ಬೇಯಿಸಿ ಬಂದೆ. ಪದಾರ್ಥ ಮಾಡೋದಿಕ್ಕೆ ಸಾಧ್ಯವಿಲ್ಲ. ಸ್ವಲ್ಪ ಮಜ್ಜಿಗೆ ಇದ್ದಿದ್ರೆ ಚೆನ್ನಾಗಿರ್ತಿತ್ತು"
ಭಟ್ಟರಿಗೂ ಹೆಂಗಸಿನ ಮೇಲೆ ಕನಿಕರ ಬಂತು. ತಮ್ಮ ಮಡದಿ ವನಜಾಕ್ಷಿಯನ್ನು ಕರೆದರು."
"ಇಕಳ್ಳೇ... ಅವರಿಗೆ ಮಜ್ಜಿಗೆ ಬೇಕಂತೆ, ಕೊಡು"
ಅಡುಗೆ ಮನೆಯಲ್ಲಿ ಎಣ್ಣೆಯ ಬಾಣಲೆಯನ್ನು ಒಲೆಯಿಂದ ಕೆಳಗಿರಿಸಿ, ತೂಗು ಬಲೆಯಿಂದ ಮಜ್ಜಿಗೆಯ ಪಾತ್ರೆ ತೆಗೆದು, ಲೋಟಕ್ಕೆ ಸುರುವಿ, ಒಂದು ಹಸಿ ಮೆಣಸಿನ ಕಾಯಿಯನ್ನು ಅದಕ್ಕೆ ಹಾಕಿ ಹೊರಗೆ ಬಂದ ವನಜಾಕ್ಷಿ, ಜೊತೆಗೆ ಒಂದು ಕರಿದ ಹಪ್ಪಳವನ್ನು ಜಾನಕಿಯ ಕೈಯಲ್ಲಿಟ್ಟು ಅವರ ಲೋಟಕ್ಕೆ ಮಜ್ಜಿಗೆಯನ್ನು ಸುರಿದರು. ಹಪ್ಪಳವನ್ನು ಮುರಿದ ಹೆಂಗಸು, "ಅಕ್ಕೋರೆ, ಏನಾದರೂ ವಿಶೇಷ ಉಂಟಾ?" ಅಂದಾಗ ವನಜಾಕ್ಷಿಗೆ ನಗು ಬಂತು.
"ಮಳೆಗಾಲದಲ್ಲಿ ಏನು ವಿಶೇಷ ಜಾನಕಮ್ಮ?"
"ಅಲ್ಲ, ನಾನು ಅದು ಕೇಳಿದಲ್ಲ"
"ಮತ್ತೆಂತ ವಿಶೇಷ? ಮದುವೆಯಾಗಿ ಹತ್ತು ವರ್ಷವಾಯಿತು. ಮಗನಿಗೆ ಎಂಟು ವರ್ಷವಾಯಿತು. ಇನ್ನೆಂತಹ ವಿಶೇಷ?" ನಕ್ಕು ನುಡಿದ ವನಜಾಕ್ಷಿ0ು ಮಾತಿನಲ್ಲಿ ನೋವಿನ ಎಳೆಯಿರುವುದನ್ನು ಗುರುತಿಸಿದ ಹೆಂಗಸು, "ಏನೇ ಹೇಳಿ... ನಾಲ್ಕೈದು ಹೆಣ್ಣು ಮಕ್ಕಳು ಓಡಾಡಿಕೊಂಡಿದ್ದ ಮನೆ ಇದು. ನಿಮಗೂ ಒಂದು ಹೆಣ್ಣು ಸಂತಾನ ಇದ್ದಿದ್ರೆ ಚೆನ್ನಾಗಿರ್ತಿತ್ತು" ಅಂದಾಗ ಅವರ ಮುಖ ಸಂಪೂರ್ಣ ಬಾಡಿದಂತಾಯಿತು.
ವೆಂಕಟ ಭಟ್ಟರಿಗೆ ಹೆಂಗಸಿನ ಮಾತು ಕೇಳಿ, " ಈ ಹೆಂಗಸಿನ ಬುದ್ಧಿಯೆ ಇಷ್ಟಾ?" ಅಂದುಕೊಂಡರು.
ವನಜಾಕ್ಷಿಯ ನೋವಿಗೆ ಒಂದಷ್ಟು ತುಪ್ಪ ಸುರಿದು, ಕೊರಂಬು ಹಿಡಿದು ನಡು ಬಾಗಿಸುತ್ತಾ ಅಂಗಳಕ್ಕೆ ಕಾಲಿಟ್ಟಿತು ಹೆಂಗಸು. ವನಜಾಕ್ಷಿ ಬಾಗಿಲು ಸರಿಸಿ, ಚಿಲಕ ಸೇರಿಸಿ ಹಿಂತಿರುಗಿದರು.
"ಅಲ್ವೇ, ಆ ಹೆಂಗಸಿಗೆಂತ ಅಧಿಕ ಪ್ರಸಂಗ? ನಮ್ಮ ಮನೆಯ ವಿಚಾರಕ್ಕೆ ಮೂಗು ತೂರಿಸೋದಕ್ಕೆ ಅದಕ್ಕೇನಿದೆ ಹಕ್ಕು?"
ವೆಂಕಟ ಭಟ್ಟರ ಮಾತು ವನಜಾಕ್ಷಿಗೆ ಸರಿ ಕಾಣಲಿಲ್ಲ.
"ಅವರು ಹೇಳಿದ್ರಲ್ಲಿ ತಪ್ಪೇನಿದೆ? ಈ ಮನೆಯಲ್ಲಿ ನಿಮ್ಮ ಅಕ್ಕಂದಿರು, ತಂಗೀಂತ ನಾಲ್ಕೈದು ಜನ ಇರ್ಲಿಲ್ವಾ? ನಮಗೂ ಒಂದು ಹೆಣ್ಣು ಮಗು ಆಗ್ಲೀಂತ ಆಸೆಯಿಂದ ಹೇಳಿತು. ಅದಕ್ಕೇನಂತೆ?"
"ನಿನಗೆ ಗೊತ್ತೇ ಇದೆ ಇವಳೆ... ನಮ್ಮ ಮನೆ ಹೆಣ್ಣು ಮಕ್ಕಳು ಯಾರು ಸುಖದಲ್ಲಿದ್ದಾರೆ ಹೇಳು? ಎಲ್ಲರೂ ಹೊಕ್ಕ ಮನೆಯಲ್ಲಿ ಕಷ್ಟ ಕಷ್ಟ ಕಷ್ಟವೆ. ಒಂದು ಸೀರೆ ಬೇಕಿದ್ರೂ ಅವು ನಮ್ಮತ್ರ ಬಂದು ಸಂಕೋಚದಿಂದ ಕೇಳ್ತಾವೆ"
"ಅದಕ್ಕೆ ಏನಂತೆ? ನಾವು ಈಗ ನೆಮ್ಮದಿಯಿಂದ ಇಲ್ವಾ? ನಮಗೊಂದು ಹೆಣ್ಣು ಮಗುವಾದ್ರೆ ಅದನ್ನು ಸಾಕುವಷ್ಟು ನಮ್ಮಲ್ಲಿ ಇಲ್ವಾ?"
"ನಮತ್ರ ಈಗ ಬೇಕಾದಷ್ಟು ಇದೆ. ಇಲ್ಲಾಂತ ನಾನು ಹೇಳೋದಿಲ್ಲ. ಆದರೆ ನಮ್ಮ ಸಂತಾನಕ್ಕೆ ಶಾಪ ಇದೇಂತ ನನ್ನ ಅನಿಸಿಕೆ"
"ಏನು ಶಾಪರೀ? ಇದ್ದ ಬದ್ದ ಉಳುಮೆಯ ಗದ್ದೆಯನ್ನೆಲ್ಲಾ ನಿಮ್ಮಪ್ಪ ಒಕ್ಕಲಿಗನಿಗೆ ಮಾಡಿದ್ರು. ಅವನು ಖುಷಿಯಲ್ಲಿಯೆ ಇದ್ದಾನೆ. ಒಂದು ಚೂರು ಯಾರ ಆಸ್ತಿಗೂ, ವಸ್ತುವಿಗೂ ಅತ್ತೆ, ಮಾವ ಆಸೆ ಪಟ್ಟವರಲ್ಲ. ಇದ್ದಷ್ಟು ಕೈಯೆತ್ತಿ ಕೊಟ್ಟಿದ್ದಾರೆ. ಹಾಗಿರುವಾಗ ನಮಗೆ ಶಾಪ ಯಾರ್ದೂಂತ?"
"ನೋಡು, ನಿನಗೆ ಅರ್ಥವಾಗ್ತದ ಇಲ್ವಾಂತ ನನಗೆ ಗೊತ್ತಿಲ್ಲ. ನನ್ನ ಅಣ್ಣಂದಿರಿಗಾಗಲಿ, ತಮ್ಮನಿಗಾಗಲಿ ಹೆಣ್ಣು ಸಂತಾನ ಉಂಟಾ? ನನ್ನ ಅಪ್ಪ, ಅಮ್ಮನಿಗೆ ತಮ್ಮ ಹೆಣ್ಣು ಮಕ್ಕಳ ಕಣ್ಣೀರು ನೋಡಿ, ಮುಂದಿನ ಸಂತಾನಕ್ಕೆ ಹೆಣ್ಣು ಆಗೋದೇ ಬೇಡಾಂತ ಅಂದುಕೊಂಡಿರಬಹುದಲ್ವಾ?"
"ಹಾಗೆ ನೋಡಿದ್ರೆ ನಿಮ್ಮ ಅಕ್ಕಂದಿರಿಗೆ, ತಂಗಿಗೆ ಹೆಣ್ಣು ಸಂತಾನವಿಲ್ವಾ? ನೀವ್ಯಾಕೆ ಹಿರಿಯರ ಶಾಪವಿದೇಂತ ಹೇಳ್ತೀರಾ?"
"ಅವರು ಕೊಟ್ಟು ಹೋದವರು. ಗಂಡು ಮಕ್ಕಳಿಗೆ ಮಾತ್ರ ಹೆಣ್ಣು ಸಂತಾನ ಬೇಡಾಂತ ಅವರ ಮನಸ್ಸಿನಲ್ಲಿದ್ದಿರಬಹುದು"
ಗಂಡನ ಮಾತು ವನಜಾಕ್ಷಿಗೆ ಹಿಡಿಸಲಿಲ್ಲ. ತಮ್ಮ ಸ್ವಂತ ಮಕ್ಕಳಿಗೆ ಯಾರಾದರೂ ಶಾಪ ಕೊಡುತ್ತಾರೆಯೆ? ಅನ್ನುವುದು ಅವಳಿಗೆ ರುಚಿಸದ ಮಾತಾಗಿತ್ತು.
ವೆಂಕಟ ಭಟ್ಟರಿಗೆ ಮಾತ್ರ ತಲೆಯಲ್ಲಿ ಅದು ಅಡರಿ ಹೋಗಿತ್ತು. ಹೆಂಡತಿಯ ಹಾಗೆ ಆತನಿಗೂ ಹೆಣ್ಣು ಮಗು ಬೇಕೆನ್ನುವ ಆಸೆಯಿದ್ದರೂ ಮನಸ್ಸಿನಲ್ಲಿ ಅದೇ ವಿಷಯ ಗಟ್ಟಿಯಾಗಿ ಕುಳಿತಿತ್ತು. ಇಲ್ಲವಾದರೆ ಮಡದಿ, ರಮಣ ಹುಟ್ಟಿದ ನಂತರ 3 ಬಾರಿ ಗರ್ಭಿಣಿಯಾದರೂ, ಎರಡು ಸಲ ಗಂಡು ಮಗು ಬೇಡವೆಂದು ಗರ್ಭ ತೆಗೆಸಿದ್ದಾಯಿತು. ಮೂರನೆ ಬಾರಿ ಗರ್ಭ ಹೋದಾಗ ಅದೆಷ್ಟು ಬೇಸರವಾಗಿತ್ತು. ನಂತರ ಗರ್ಭ ನಿಂತೇ ಇಲ್ಲವೇಕೆ?
"ನೀನು ಏನೆ ಹೇಳು ಆ ಹೆಂಗಸು ಸರಿಯಿಲ್ಲ. ನಮ್ಮ ಮನೆಯ ವಿಷಯಗಳನ್ನೆಲ್ಲಾ ಇನ್ನೊಂದು ಮನೆಗೆ ಹೇಳಿ ಹಿಂದಿನಿಂದ ನಗಾಡುತ್ತೆ ಅಷ್ಟೆ. ಇಲ್ಲಾಂದ್ರೆ ಎದುರು ಮನೆಯ ಶಾಂತಕ್ಕ ನಮ್ಮ ಜೊತೆಗೆ ಜಗಳ ಕಾಯೋಕಿತ್ತಾ? ಮೂರು ಹೊತ್ತು ಗದ್ದೆ ಕೆಲಸ ಮಾಡಿಕೊಂಡು ನಾವು ಕೊಡ್ತಿದ್ದ ಊಟ ತಿಂದುಕೊಂಡು ಒಳ್ಳೆಯ ರೀತಿಯಲ್ಲಿ ಇರಲಿಲ್ವಾ?"
"ಅದಕ್ಕೆಂತ ಮಾಡೋದು? ಅವರ ಮಗ ಬೊಂಬಾಯಿಯಲ್ಲಿ ಒಳ್ಳೆಯ ಉದ್ಯೋಗದಲ್ಲಿದ್ದಾನೆ. ತಾಯಿಯನ್ನು ಕೆಲಸಕ್ಕೆ ಹೋಗುವುದು ಬೇಡ ಅಂದಿದ್ದಾನೆ. ಅವರು ಕೆಲಸ ನಿಲ್ಲಿಸಿದ್ದಾರೆ. ಆ ಹೆಂಗಸು ಬರ್ಲಿಲ್ಲಾಂತ ನಮ್ಮ ಮನೆ ಕೆಲಸ ನಿಂತಿದಾ? ನಾವು ಮಾಡಿಕೊಂಡು ಹೋಗ್ತಾ ಇಲ್ವಾ?"
"ನೀನು ಗದ್ದೆಗೆ ಇಳಿಯುವ ಹಾಗಾಗಿದ್ದು ಅದೇ ಹೆಂಗಸಿನಿಂದ ಅಲ್ವಾ? ಈ ಜಾನಕಮ್ಮ ಆ ಹೆಂಗಸಿಗೆ ಏನೋ ಕಿವಿಯೂದಿದೆ. ಅದಕ್ಕೆ ಆ ಹೆಂಗಸು ಇದ್ದಕ್ಕಿದ್ದಂತೆ ಜಗಳ ಮಾಡ್ಕೊಂಡು ಕೆಲಸ ಬಿಡ್ತು ನೋಡು"
"ನಾನು ನಿಮಗೆ ಹೇಳ್ತಾ ಇಲ್ವಾ... ಈ ಜಾಗ ಮಾರಿ ಎಲ್ಲಾದ್ರೂ ಪಟ್ಟಣದ ಕಡೆಗೆ ಹೋಗೋಣಾಂತ. ನೀವು ಕೇಳ್ತಾ ಇಲ್ಲ. ನಮ್ಮ ಮಣ್ಣಿನ ಋಣ ಇಲ್ಲೆ ಇದೆ. ಇದ್ದದನ್ನು ನಾವೆ ಮಾಡ್ಕೊಂಡು ಹೋಗುವುದು ಚೆಂದ ಅಲ್ವಾ?"
"ಈ ಜಾಗನ ಬಿಟ್ಟು ಹೋಗುವುದು ಕಷ್ಟಾಂತ ನಿನಗೆ ಗೊತ್ತಿಲ್ವಾ? ನನ್ನ ಅಪ್ಪಯ್ಯ ಎಷ್ಟು ಕಷ್ಟ ಪಟ್ಟು ಈ ಜಾಗಾನ ತೆಗೆದುಕೊಂಡಿದ್ದಾರೇಂತ ನಿನಗೆ ಗೊತ್ತಿಲ್ವಾ? ಅಂತದ್ರಲ್ಲಿ ಮಾರುವ ಮಾತುಂಟಾ ಅಥವಾ ನಾವು ಅದನ್ನು ಯೋಚಿಸುವುದೂ ತಪ್ಪಲ್ವಾ?"
ಮಾತು ಮುಂದುವರಿಸಲು ಇಚ್ಛಿಸದೆ ವನಜಾಕ್ಷಿ ತಟ್ಟೆ, ಲೋಟಗಳನ್ನು ಎತ್ತಿಕೊಂಡು ಅಡುಗೆ ಕೋಣೆಯೊಳಗೆ ನಡೆದರು.

***
ಎಪ್ಪತ್ತರ ದಶಕದಲ್ಲಿ ತಮಿಳುನಾಡಿನಲ್ಲಿ ರಾಜಕೀಯ ಕ್ರಾಂತಿಯಾದಾಗ ಶ್ರೀನಿವಾಸರಿಗೆ ತಾವು ಮಧುರೈ0ುಲ್ಲಿ ನಡೆಸುತ್ತಿದ್ದ ಹೊಟೇಲು ಹೆಚ್ಚು ಸಮಯ ಮುಂದುವರಿಯಲಾರದೆನಿಸಿತು. ತಮ್ಮನ್ನೇ ನಂಬಿರುವ ತಮ್ಮಂದಿರಾದ ಗಿರೀಶ ಮತ್ತು ಜಗನ್ನಾಥರನ್ನು ಕರೆದು ತಮ್ಮ ಸಮಸ್ಯೆಯನ್ನು ಮುಂದಿಟ್ಟರು.

"ಇನ್ನು ಈ ಪುಢಾರಿಗಳ ಉಪಟಳದಿಂದ ಹೊಟೇಲು ಮುಂದುವರಿಸಿಕೊಂಡು ಹೋಗುವುದು ತುಂಬಾ ಕಷ್ಟ. ಅವರುಗಳು ದಿನಕ್ಕೊಂದು ತಗಾದೆ ತೆಗೆದು, ಹಫ್ತಾ ವಸೂಲಿಗೂ ಮುಂದಾಗುತ್ತಿದ್ದಾರೆ. ನಾವು ಮರ್ಯಾದೆಯಿಂದ ಬಾಳುವುದು ಕಷ್ಟವೇ. ಇನ್ನು ಮುಂದೆ ಏನು ಮಾಡುವುದು? ನೀವೂ ಯೋಚಿಸಿ... ಒಂದು ನಿರ್ಧಾರಕ್ಕೆ ಬರೋಣ"
ಶ್ರೀನಿವಾಸರ ಹಾಗೇ ಗಿರೀಶ ಹಾಗೂ ಜಗನ್ನಾಥರಿಗೂ ಎಂಟು ಹತ್ತು ಮಕ್ಕಳು. ಇದ್ದಕ್ಕಿದಂತೆ ಹೊಟೇಲು ಮುಚ್ಚಿ, ಸಂಸಾರವನ್ನು ನಡು ಬೀದಿಯಲ್ಲಿ ನಿಲ್ಲಿಸುವ ಪರಿಸ್ಥಿತಿ ಎದುರಾದರೆ? ಎಂಬ ಆತಂಕ ತಮ್ಮಂದಿರಿಬ್ಬರಲ್ಲು ಮೂಡಿತು. ಅವರೊಂದು ನಿರ್ಧಾರಕ್ಕೆ ಬಂದು, "ಅಣ್ಣಾ, ಕಷ್ಟನೋ ಸುಖನೋ ನಮ್ಮ ಜೀವನ ಇಲ್ಲೇ ಸಾಗಿಸುವುದು ಬಿಟ್ಟರೆ ಬೇರೆ ದಾರಿಯಿಲ್ಲ" ಎಂದು ತಮ್ಮ ಅಸಹಾಯಕತೆಯನ್ನು ತೋಡಿಕೊಂಡಾಗ, ಶ್ರೀನಿವಾಸರಿಗೆ ನಿಜವಾಗಿಯೂ ಇರುಸು ಮುರಿಸಿನ ಪರಿಸ್ಥಿತಿಯಾಯಿತು. ಎಲ್ಲಾ ಜವಾಬ್ದಾರಿಯನ್ನು ತಾವೇ ಹೊತ್ತು ಕೊಂಡು ಹೇಗೋ ಹೊಟೇಲನ್ನು ನಡೆಸಿಕೊಂಡು ಹೋಗಿದ್ದರು. ಅವರಿಗಂತೂ ಮುಂದುವರಿಸುವ ಯೋಚನೆಯಿಲ್ಲ. ತಮ್ಮಂದಿರಿಬ್ಬರಿಗೆ ಜವಾಬ್ದಾರಿಯನ್ನು ಬಿಟ್ಟು ಹೊಗುವ ನಿರ್ಧಾರ ಕೈಗೊಂಡರು.
"ನಾನು ನಿರ್ಧಾರ ತೆಗೆದುಕೊಂಡಾಯಿತು. ಇನ್ನು ಕಷ್ಟನೋ ಸುಖನೋ ನಾನು ಊರಿಗೆ ಹೋಗಿ ಸೆಟಲ್ ಆಗಿ ಬಿಡ್ತೀನಿ. ಹೊಟೇಲನ್ನು ನೀವು ನಿಭಾಯಿಸಿಕೊಂಡು ಹೋಗ್ತೀರೀಂತ ನನಗೆ ಧೈರ್ಯ ಇದೆ"
ಶ್ರೀನಿವಾಸನ ಮಾತುಗಳನ್ನು ಕೇಳಿ ತಮ್ಮಂದಿರೇನು ಹೌಹಾರಲಿಲ್ಲ. ಸಂತೋಷದಿಂದ ಒಪ್ಪಿಕೊಂಡರು.
"ನನ್ನ ಪಾಲಿನ ಹಣವನ್ನು ನಾನು ಹಿಂತೆಗೆ0ುಬಹುದಲ್ಲಾ?" ಶ್ರೀನಿವಾಸರು ಸಂಕೋಚದಿಂದ ಕೇಳುವಾಗ ತಮ್ಮಂದಿರು ಒಬ್ಬರ ಮುಖ ಒಬ್ಬರು ನೋಡಿಕೊಂಡರು.
"ಎಲ್ಲ ಹಣ ನೀನು ತೆಗೆದುಕೊಂಡು ಹೋದರೆ ನಮಗೆ ನಿಭಾಯಿಸಲು ಕಷ್ಟವಾಗುತ್ತದೆ. ಹೇಗೂ ನೀನು ಇಲ್ಲಿಗೆ ನಮ್ಮನ್ನು ನೋಡೋದಿಕ್ಕೆ ಬರುತ್ತಿಯಲ್ಲಾ. ಆಗ ಸ್ವಲ್ಪ ಸ್ವಲ್ಪವೇ ಹಣ ಹೊಂದಿಸಿ ಕೊಡುತ್ತೇವೆ" ಎಂದು ಹೇಳುವಾಗ ಒಪ್ಪಿಕೊಳ್ಳವುದು ಬಿಟ್ಟರೆ ಬೇರೆ ದಾರಿಯೇ ಇರಲಿಲ್ಲ.
ಅಂತೂ ನಾಲ್ಕು ಗಂಡು, ನಾಲ್ಕು ಹೆಣ್ಣು ಮಕ್ಕಳ ಜೊತೆಗೆ ಕೈ ಹಿಡಿದವಳನ್ನು ಕರೆದುಕೊಂಡು ಮೂರು ದಿನ ರೈಲಿನ ಪ್ರಯಾಣ ಜೊತೆಗೆ ಒಂದು ದಿನ ಬಸ್ಸಿನಲ್ಲಿ ಪ್ರಯಾಣ ಮುಗಿಸಿ, ಊರಿಗೆ ಬರುವಾಗ ಅಣ್ಣ ಅನಂತರಾಮ ಬಹಳ ಸಂತೋಷದಿಂದಲೇ ಸ್ವಾಗತಿಸಿದ್ದ. ಅನಂತರಾಮನಿಗೂ ಹತ್ತು ಜನ ಮಕ್ಕಳು. ಜೊತೆಗೆ ಶ್ರೀನಿವಾಸನ ಎಂಟು ಮಕ್ಕಳು ಮನೆಯಲ್ಲಿ ನಿತ್ಯ ಗಲಾಟೆಯೆ. ಶ್ರೀನಿವಾಸನ ಮಕ್ಕಳಿಗೆ ಕನ್ನಡ, ತುಳು ಭಾಷೆ ಅಷ್ಟಾಗಿ ಬರುತ್ತಿರಲಿಲ್ಲವಾದುದರಿಂದ ಅವುಗಳು ತಮಿಳಿನಲ್ಲಿಯೆ ಏನೇನೋ ಅಂದುಕೊಂಡು ಸುಮ್ಮನಾಗುತ್ತಿದ್ದವು.

ಒಂದು ದಿನ ರಾತ್ರಿ ಒಂದು ಸಣ್ಣ ವಿಷಯದ ಕಿಡಿ ದೊಡ್ಡ ಜ್ವಾಲೆಯಾಗಿ ಹೋಯಿತು. ಶ್ರೀನಿವಾಸನ ದೊಡ್ಡ ಮಗ ತನ್ನ ದೊಡ್ಡಪ್ಪ ಅನಂತರಾಮನ ಎದುರಿಗೆ ಕುರ್ಚಿಯ ಮೇಲೆ, `ಕಾಲಿನ ಮೇಲೆ ಕಾಲು ಹಾಕಿ ಕುಳಿತ' ಅನ್ನುವುದು ಅನಂತರಾಮನಿಗೆ ಆ ಹುಡುಗ `ಮರ್ಯಾದೆ' ಕೊಡಲಿಲ್ಲ ಅನ್ನುವ ಮಟ್ಟಿಗೆ ಬಂದು ನಿಂತಿತು. ರಾತ್ರಿ ಅಂಗಡಿ ಮುಗಿಸಿ ಬಂದ ಶ್ರೀನಿವಾಸನನ್ನು ಊಟ ಮಾಡಲು ಬಿಡದೆ ಜಗಳ ಕಾಯ್ದರು ಅನಂತರಾಮ.
"ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಯಾವುದನ್ನೂ ಹೇಳಿಕೊಡಲಿಲ್ಲ. ದೊಡ್ಡವರು ಅನ್ನುವ ಗೌರವವೇ ನಿನ್ನ ಮಕ್ಕಳಿಗೆ ಇಲ್ಲ"
ಶ್ರೀನಿವಾಸನಿಗೆ ಹಸಿದ ಹೊಟ್ಟೆ ಒಂದು ಕಡೆಯಾದರೆ, ಇನ್ನೊಂದು ಕಡೆ ಅಣ್ಣ ಹೇಳಿದ ಮಾತುಗಳು, ತನ್ನ ಹಿರಿಯ ಮಗನ ಮೇಲೆ ಕೋಪ ಉಕ್ಕಿ ಬರುವಂತೆ ಮಾಡಿತು. ಮಗನನ್ನು ಕರೆದು ಕೆನ್ನೆಗೆ ನಾಲಕ್ಕು ಬಾರಿಸಿ, ಅಗ್ರಜನ ಕಾಲು ಹಿಡಿಸಿದ.
ಶ್ರೀನಿವಾಸನ ಹೆಂಡತಿ ನಳಿನಾಕ್ಷಿಗೆ ಈ ರೀತಿ ತನ್ನ ಹಿರಿಯ ಮಗ ಸುಮ್ಮನೆ ಪೆಟ್ಟು ತಿಂದದ್ದು ಅವಳ ಕಣ್ಣುಗಳಲ್ಲಿ ನೀರು ತರಿಸಿತು.
ರಾತ್ರಿ ಗಂಡ ಹತ್ತಿರ ಬಂದಾಗ, "ರೀ, ಎಷ್ಟು ದಿನಾಂತ ಈ ಮನೆಯಲ್ಲಿ ಜೀವ ತೇಯೋದು? ನಮ್ಮ ಮಕ್ಕಳಿಗಂತೂ ಉಸಿರು ಕಟ್ಟೋ ಹಾಗಾಗಿದೆ. ಕೂತರೆ ತಪ್ಪು, ನಿಂತರೆ ತಪ್ಪು. ನಿಮ್ಮ ಅಣ್ಣನ ಮಕ್ಕಳು ಉಂಡಾಡಿ ಗುಂಡರ ತರಹ ಅಲೆದಾಡಿಕೊಂಡು ಬರ್ತಾರೆ. ನಮ್ಮ ಮಕ್ಕಳು ಅಡುಗೆ ಕೆಲಸದಿಂದ ಹಿಡಿದು ಗದ್ದೆ ಕೆಲಸ ಮಾಡುವವರೆಗೂ ಸಹಾಯ ಮಾಡ್ಬೇಕು. ನಮ್ಮ ಮಕ್ಕಳು ಬೆಳೆದಿರುವುದೆಲ್ಲಾ ಪಟ್ಟಣದಲ್ಲಿ. ಈ ಹಳ್ಳಿಯ ರೀತಿ, ರೀವಾಜು ಅವುಗಳಿಗೆಲ್ಲಾ ಹೇಗೆ ಗೊತ್ತಾಬೇಕು, ಹೇಳಿ? ಇವತ್ತು ಇಷ್ಟು ಸಣ್ಣ ವಿಷಯಕ್ಕೆ ಹೇಗೆ ಹಾರಾಡಿದ್ರು ನೋಡಿದ್ರಾ?" ಅಂದಾಗ
ಹೆಂಡತಿಯ ಮಾತಿಗೆ ತೆಪ್ಪಗೆ ಮುಸುಕೆಳೆದು ಮಲಗಿದ ಶ್ರೀನಿವಾಸನಿಗೆ ಮುಸುಕಿನ ಒಳಗಿಂದಲೇ ಚಿಂತೆ ಕಾಡಿತು. ಇದೇ ರೀತಿ ಮುಂದುವರಿದರೆ, ಒಂದಲ್ಲ ಒಂದು ದಿನ ಅಗ್ರಜ `ಮನೆ ಬಿಟ್ಟು ಹೋಗು' ಅಂದರೆ ಇಷ್ಟು ದೊಡ್ಡ ಸಂಸಾರವನ್ನು ಹಿಡಿದುಕೊಂಡು ಹೋಗುವುದು ಎಲ್ಲಿಗೆ?
ಕೊನೆಗೆ ಹೊರಳಾಡಿ ಹೊರಳಾಡಿ ಒಂದು ನಿರ್ಧಾರಕ್ಕೆ ಬಂದ. ಹೇಗೂ ತನ್ನ ಪಾಲಿನ ಹಣ ತಮ್ಮಂದಿರಿಂದ ಬರುವುದಿದೆ. ಮಧುರೈಗೆ ಹೋಗಿ ಆ ಹಣ ಹಿಡಿದುಕೊಂಡು ಬಂದು ಊರಿನಲ್ಲಿಯೆ ಸ್ವಲ್ಪ ಆಸ್ತಿಯನ್ನು ತೆಗೆದುಕೊಂಡು ಸಣ್ಣ ಮನೆ ಕಟ್ಟಿಕೊಂಡು ಸಂಸಾರ ಹೂಡುವುದು. ನಳಿನಾಕ್ಷಿಗೆ ತನ್ನ ನಿರ್ಧಾರವನ್ನು ತಿಳಿಸಿದ. ಆಕೆಗೆ ಸುತಾರಾಂ ಇಷ್ಟವಿಲ್ಲ.
"ನಮ್ಮ ಮಕ್ಕಳು ಸಿಟಿಯಲ್ಲಿ ಬೆಳೆದವರು. ಪಟ್ಟಣದಲ್ಲಿಯೆ ಒಂದು ಸಣ್ಣ ಮನೆಯನ್ನು ನೋಡಿ. ನೀವೂ ಅಲ್ಲಿ ಸಣ್ಣ ಮಟ್ಟದಲ್ಲಿ ಹೊಟೇಲೋ, ಅಂಗಡಿಯೋ ಇಟ್ಟುಕೊಂಡರೆ ಮನೆ ಖರ್ಚು ನಡೆಯುತ್ತದಲ್ಲಾ?"
"ಪಟ್ಟಣದ ಬದುಕು ಅಷ್ಟು ಸುಲಭ ಅಲ್ಲ. ಪಟ್ಟಣ ಬೆಳೆದ ಹಾಗೇ ನಮ್ಮ ಆದಾಯನೂ ಬೆಳೆಯುವ ಹಾಗಿದ್ದರೆ ಸರಿ, ಇಲ್ಲದಿದ್ದರೆ ಈ ಮಕ್ಕಳನ್ನು ಕಟ್ಟಿಕೊಂಡು ಸಂಸಾರ ನಡೆಸುವುದು ಹೇಗೆ? ಮೊದಲು ಅಣ್ಣನ ಬಳಿ ಮಾತನಾಡುತ್ತೇನೆ. ಅವನು ಏನು ಹೇಳುತ್ತಾನೋ ಹಾಗೆ ಮಾಡೋಣ" ಅಂದಾಗ ನಳಿನಾಕ್ಷಿಗೆ ಮಾತನಾಡುವಂತೆ ಇರಲಿಲ್ಲ. ಅಣ್ಣನ ಮಾತೇ ವೇದವಾಕ್ಯ ಎಂದು ತಿಳಿದ ಶ್ರೀನಿವಾಸನಿಗೆ ಅಣ್ಣನಿಂದಲೇ ಮಾತು ಬಂದಾಗ ಅಧೀರನಾದ.
"ಶ್ರೀನಿವಾಸ, ನಮ್ಮ ಸಂಸಾರಗಳು ದೊಡ್ಡ ಸಂಸಾರಗಳು. ಹಿರಿಯರ ಮನೇಂತ ಇಷ್ಟು ದಿನ ನಿನ್ನನ್ನು ಇಲ್ಲಿ ಇರೂಂತ ಹೇಳಿದೆ. ನನಗೂ ಬೇಸಾಯದಿಂದ ಏನೂ ಸಿಗ್ತಾ ಇಲ್ಲ. ನೀನು ಖರ್ಚಿಗೆ ಕೊಡುವುದು ಕೂಡ ಏನೂ ಸಾಲುವುದಿಲ್ಲ. ಹಿರಿಯರ ಆಸ್ತಿ ಬೇಡಾಂತ ಹೇಳಿ ನೀವುಗಳು ನನ್ನ ಹೆಸರಿಗೆ ಬರೆದು ಕೊಟ್ಟಿದ್ದೀರಿ. ಆದರಿಂದ ನೀನು ಇಲ್ಲೇ ಎಲ್ಲಾದರೂ ಆಸ್ತಿ ಖರೀದಿಸುವುದು ಒಳ್ಳೆಯದು. ಸುಮ್ಮನೆ ನಾವು ನಾವು ಜಗಳ ಮಾಡಿಕೊಂಡು ನಿಷ್ಠುರ ಆಗುವುದಕ್ಕಿಂತ ಮೊದಲೇ ನೀನು ಬೇರೆ ವ್ಯವಸ್ಥೆ ಮಾಡಿಕೋ"
ಅಗ್ರಜನ ಮಾತು ಕೇಳಿದ ನಂತರ ಆ ಮನೆಯಲ್ಲಿ ನಿಂತರೆ ಮರ್ಯಾದೆಯಿಲ್ಲವೆನಿಸಿತು. ಸ್ವಂತ ಅಣ್ಣನ ಮಕ್ಕಳೇ ಹೀಯಾಳಿಸುವಾಗ ಶ್ರೀನಿವಾಸನಿಗೆ ದು:ಖವೇ ಬರುತ್ತಿತ್ತು.
"ಅಣ್ಣಯ್ಯ , ಒಂದೆರಡು ತಿಂಗಳು ಅವಕಾಶ ಕೊಡು. ಎಲ್ಲಾದರೂ ಇದೇ ಊರಿನಲ್ಲಿ ಆಸ್ತಿ ತೆಗೆದುಕೊಂಡು ಸಣ್ಣ ಮನೆ ಕಟ್ಟಿ ಕುಳಿತುಕೊಳ್ಳುತ್ತೇನೆ. ಅಲ್ಲಿಯವರೆಗೆ..."
ಮುಂದೆ ಮಾತನಾಡಲಾರದೆ ಗಂಟಲುಬ್ಬಿ ಬಂತು.
"ಸರಿ, ನಮ್ಮ ಶ್ಯಾನುಭೋಗರದ್ದೆ ಜಾಗ ಮಾರಾಟಕ್ಕಿದೆ. ನೀನು ದುಡ್ಡಿನ ವ್ಯವಸ್ಥೆಯನ್ನು ಮಾಡು. ಮುಂದೆ ನೋಡೋಣ" ಅನ್ನುವಾಗಲಷ್ಟೆ ಶ್ರೀನಿವಾಸನ ಮನಸ್ಸಿಗೆ ನೆಮ್ಮದಿಯೆನಿಸಿದ್ದು.
ಅಂಗಡಿಗೆ ಒಂದು ವಾರ ಬಾಗಿಲು ಹಾಕಿ ಮಧುರೈಗೆ ಹೊರಟ ಶ್ರೀನಿವಾಸ. ತಮ್ಮಂದಿರು ಆಪ್ಯಾಯತೆಯಿಂದ ಬರ ಮಾಡಿಕೊಳ್ಳುತ್ತಾರೆನ್ನುವ ನಿರೀಕ್ಷೆ ಹುಸಿಯಾಯಿತು. ಅಣ್ಣ ಬಂದಿರುವ ವಿಷಯ ಅವರಿಗೆ ಸ್ಪಷ್ಟವಾಗಿತ್ತು. ಅದಕ್ಕಾಗಿಯೇ ಇಬ್ಬರೂ ಮುಖ ಗಂಟಿಕ್ಕಿದಂತೆ ಇದ್ದರು. ಶ್ರೀನಿವಾಸ ಕೇಳಿಯೇ ಬಿಟ್ಟ.
"ನಾನೀಗ ತಾಪತ್ರಯದಲ್ಲಿದ್ದೇನೆ. ನನ್ನ ಪಾಲಿನ ಹಣ ನೀವು ಈಗ ಕೊಡದಿದ್ದರೆ ನನ್ನ ಸಂಸಾರ ಬೀದಿಗೆ ಬೀಳುವ ಸ್ಥಿತಿ" ಪೀಠಿಕೆ ಹಾಕುವಾಗ ಹಿರಿಯ ತಮ್ಮ ಗಿರೀಶ ಒಮ್ಮೆಗೆ ಬಿ.ಪಿ. ಏರಿಸಿಕೊಂಡವರಂತೆ ಶ್ರೀನಿವಾಸನ ಎದುರು ಬಂದು ನಿಂತ.
"ಯಾವುದು ನಿನ್ನ ಹಣ? ನಾವು ಯಾಕೆ ಕೊಡಬೇಕು? ನಮಗೆ ಸಂಸಾರ ಇಲ್ವಾ? ನೀನು ಬಿಟ್ಟು ಹೋದ ನಂತರ ವ್ಯಾಪಾರ ಅಷ್ಟಕಷ್ಟೆ. ನಮಗೂ ಇಲ್ಲಿ ನೆಮ್ಮದಿಯಿಲ್ಲ. ನಾವು ಬಿಟ್ಟು ಬಿಡ್ತಾ ಇದ್ದೇವೆ"
ಗಿರೀಶನ ಮಾತುಗಳನ್ನು ಕೇಳಿ ಶ್ರೀನಿವಾಸನಿಗೆ ಆಕಾಶ ತಲೆಯೆ ಮೇಲೆ ಬಿದ್ದ ಹಾಗಾಯಿತು. ಅದರೂ ಎದೆಗುಂದದೆ ಹೇಳಿದ.
"ನೀವು, ಕೊಟ್ಟ ಮಾತಿಗೆ ತಪ್ತಾ ಇದ್ದೀರಿ. ನಾನು ಹೇಳಿದ್ನಲ್ಲಾ ನೀವುಗಳು ಹಣ ಕೊಡದಿದ್ದರೆ ನನ್ನ ಸಂಸಾರ ಬೀದಿಗೆ ಬರುತ್ತದೆ. ದಯವಿಟ್ಟು ಇಲ್ಲ ಅನ್ಬೇಡಿ" ತಮ್ಮಂದಿರಿಗೆ ಕೈ ಮುಗಿದು ಕೇಳುವ ಸ್ಥಿತಿ ಬಂದಾಗ ಮನಸಿನಲ್ಲಿ ನೋವು ಮಡುಗಟ್ಟಿತು.
ಜಗನ್ನಾಥ ಒಳಗೆ ಹೋದವನೇ ಸಿಹಿತಿಂಡಿ ಕತ್ತರಿಸುವ ಚೂರಿಯನ್ನು ತಂದು ಶ್ರೀನಿವಾಸನ ಮುಂದೆ ನಿಂತ.
"ಏನು ನಿನ್ನ ಹಣ ಬಾಕಿಯಿರೋದು? ಏನೂ ಮಾತನಾಡದೆ ಬಂದ ಹಾಗೆ ಹಿಂದೆ ಹೋಗು. ಇಲ್ಲಾಂದ್ರೆ ನೀನು ಇಲ್ಲಿಗೆ ಬಂದೇ ಇಲ್ಲಾಂತ ಮಾಡ್ತೀನಿ"
ಕಿರಿಯ ತಮ್ಮನೂ ಮಿತಿಮೀರಿ ವರ್ತಿಸಿದಾಗ ಶ್ರೀನಿವಾಸ ಭೂಮಿಗಿಳಿದು ಹೋದ. ಹಣವಿಲ್ಲದೆ ಬರಿಗೈಯಲ್ಲಿ ಹೋದರೆ ಆಗುವ ಹೋಗುವ ವಿಚಾರವಲ್ಲವೆಂದು ತಿಳಿಯಿತು.
ತಾನೇ ಮುಂದೆ ತಂದ ತಮ್ಮಂದಿರು ತಿರುಗಿ ನಿಂತಾಗ ಅಸಹಾಯಕನಂತೆ ಕೈ ಚೆಲ್ಲಿ ಕುಳಿತ.
"ನಾನು ನಿಮ್ಮ ಜೊತೆಗೆ ಜಗಳ ಕಾಯುವುದಕ್ಕೆ ಬಂದಿಲ್ಲ. ನನ್ನ ಹಣ ಕೇಳೊದಿಕ್ಕೆ ಬಂದೆ. ನೀವು ಕೊಡದಿದ್ರೆ ಬೇಡ. ನೀವುಗಳು ಚೆನ್ನಾಗಿರಿ. ಆದರೆ ನಾನು ಬರಿಗೈಯಲ್ಲಿ ಊರಿಗೆ ಹೋದರೆ ಅಣ್ಣನಿಗೂ ನನ್ನ ಮೇಲೆ ಕೋಪ ಬರುತ್ತೆ. ನನಗೆ ಸಾಲದ ರೂಪದಲ್ಲಿ ಒಂದು ಐವತ್ತು ಸಾವಿರ ಹಣ ಕೊಟ್ರೆ... ನಿಮ್ಮ ಕಷ್ಟ ಕಾಲದಲ್ಲಿ ಹಿಂದಿರುಗಿಸ್ತೇನೆ" ಎಂದು ತಮ್ಮಂದಿರನ್ನು ಕೇಳುವಾಗ ಜಗನ್ನಾಥ, ಗಿರೀಶನ ಕಡೆಗೆ ಕಣ್ಣು ಮಿಟುಕಿಸಿದ.
ಗಿರೀಶ ಒಳಗೆ ಗೋದ್ರೇಜ್ನಿಂದ ಐವತ್ತು ಸಾವಿರ ಎಣಿಸಿ, "ಇದು ಜಗನ್ನಾಥನ ಹಣ. ನೀನು ವಾಪಸು ಕೊಡುವಾಗ ಅವನಿಗೆ ಕೊಟ್ಟು ಬಿಡು" ಹಣವನ್ನು ಶ್ರೀನಿವಾಸನ ಕೈಯಲ್ಲಿಟ್ಟಾಗ ಶ್ರೀನಿವಾಸನಿಗೆ ಪರ್ವತ ಸಿಕ್ಕಷ್ಟು ಸಂತಸವಾಯಿತು. ತಮ್ಮಂದಿರ ಮನೆಗೂ ಹೋಗದೆ ನೇರವಾಗಿ ರೈಲು ಹಿಡಿದು ಊರು ತಲುಪಿದ.
ಹೆಂಡತಿಯ ಮಾತು ಕೇಳದೆ ಅವಳನ್ನು ಸಮಾಧನಿಸಿದ.
"ನೋಡು, ಪಟ್ಟಣದ ಬದುಕು ನಮಗೆ ಕಷ್ಟ. ಇಲ್ಲೆ ಶ್ಯಾನುಭೋಗರ ಆಸ್ತಿ ಮಾರೋದಿದೆಯಂತೆ. ಒಳ್ಳೊಳ್ಳೆಯ ಉಳುಮೆಯ ಗದ್ದೆಗಳು. ಆಸ್ತಿ ತೆಗೆದು ಹಾಕಿದರೆ ಮುಂದೆ ಮಕ್ಕಳಿಗೆ ಅನುಕೂಲವಾಗಬಹುದು. ನಾನು ಅಣ್ಣನ ಜೊತೆಗೆ ಹೋಗಿ ನೋಡಿಕೊಂಡು ಬರುತ್ತೇನೆ"
"ಅಲ್ಲ, ಈ ಹಳ್ಳಿಯಲ್ಲಿ ಉಳುಮೆಯ ಆಸ್ತಿ ತೆಗೆದು ಹಾಕಿದ್ರೆ, ನಮ್ಮ ಮಕ್ಕಳು ಏನು ಮಾಡಬೇಕು? ಅವುಗಳಿಗೆ ಗದ್ದೆಯ ಕೆಲಸ ಮಾಡಿ ಗೊತ್ತುಂಟಾ?"
"ನಮಗೆ ಬದುಕ ಬೇಕಾದ್ರೆ ನಮ್ಮ ಮಕ್ಕಳು ಗದ್ದೆಯ ಕೆಲಸ ಅಲ್ಲ... ಯಾವ ಕೆಲಸವನ್ನಾದ್ರೂ ಕಲಿಬೇಕು. ಮತ್ತೆ ಅವರಿಗೂ ಅಭ್ಯಾಸವಾಗುತ್ತದೆ"
ಶ್ರೀನಿವಾಸ ನಳಿನಾಕ್ಷಿಯ ಬಾಯಿ ಮುಚ್ಚಿಸಿದ. ಮರುದಿನ ಅಗ್ರಜನನ್ನು ಕರೆದುಕೊಂಡು ಶ್ಯಾನುಭೋಗರ ಬಳಿ ಮಾತನಾಡಲು ಹೋದ.
ಶ್ಯಾನುಭೋಗರು ಮೊದಲೆ ತಮ್ಮ ಜಾಗ ಮಾರಾಟ ಮಾಡುವುದೆಂದು ನಿರ್ಧರಿಸಿದ್ದರಿಂದ ಉಟ್ಟ ಬಟ್ಟೆಯಲ್ಲಿಯೆ ಗದ್ದೆಗಳನ್ನು ತೋರಿಸಲು ಹೊರಟರು. ಶ್ರೀನಿವಾಸನಿಗೆ ಗದ್ದೆಗಳೆಲ್ಲ ಹಿಡಿಸಿದವು. ಐವತ್ತು ಸಾವಿರಕ್ಕೆ ಎಲ್ಲವೂ ಇತ್ಯರ್ಥವಾಗಿ ಶ್ರೀನಿವಾಸ ಆ ಆಸ್ತಿಯ ಒಡೆಯನಾದ. ಆತ ಮಾಡಿದ ದೊಡ್ಡ ತಪ್ಪೆಂದರೆ ಗೇಣಿಯನ್ನು ಮುಂದುವರಿಸಿಕೊಂಡು ಬಂದಿದ್ದು. ಮನೆ ಕಟ್ಟಿ ಸಂಸಾರವನ್ನು ನೋಡಿಕೊಳ್ಳುವ ಹೊತ್ತಿಗೆ `ಉಳುವವನೆ ಹೊಲದೊಡೆಯ' ಕಾನೂನು ಬಂದಾಗ ಕಷ್ಟದಲ್ಲಿ ತೆಗೆದುಕೊಂಡ ಆಸ್ತಿಯೂ ಕೈ ಬಿಟ್ಟು ಹೋಯಿತು. ಮದುವೆಗೆ ತಯಾರಾಗಿ ನಿಂತ ಹೆಣ್ಣು ಮಕ್ಕಳಿಗೆ ಅದು ಹೇಗೋ ನಳಿನಾಕ್ಷಿ ಮಾಡಿಟ್ಟ ಚಿನ್ನವನ್ನು ಮಾರಿ ಮದುವೆ ಮಾಡಿಸಿದ. ಆ ಹೊತ್ತಿಗೆ ಹಿರಿಯ ಮಗ ಕೆಲಸಕ್ಕೆ ಸೇರಿದ್ದರಿಂದ ಅಷ್ಟಿಷ್ಟು ಮನೆ ಖರ್ಚು ನಡೆಯುತ್ತಿತ್ತು. ಹುಡುಗಿಯರು ಮದುವೆಯಾಗಿ ಹೋದರೂ ಅವರಿಗೆ ನೆಮ್ಮದಿಯಿರಲಿಲ್ಲ. ಹಿರಿ ಮಗಳು ಉಪಾಸನ ಬಡತನದಲ್ಲಿಯೆ ಸಂಸಾರ ಹೂಡುವಂತಾದರೆ, ಎರಡನೆಯ ಮಗಳು ಆರಾಧನ ಮದುವೆಯಾಗಿ ಆರು ತಿಂಗಳಿನಲ್ಲೇ ತವರು ಸೇರುವಂತಾಯಿತು. ಮೂರನೆಯ ಮಗಳು ಅರ್ಚನಾಳ ಗಂಡ ಸ್ಫುರದ್ರೂಪಿ ಯುವಕ. ಸ್ವಲ್ಪ ಹೆಣ್ಣುಗಳ ಜೊತೆಗೆ ಮಾತುಕತೆ ನಡೆದಾಗ ಸಂಶಯ ಹೊಂದಿದ ಅರ್ಚನಾಳಿಗೆ ದಿನ ಅವನ ಜೊತೆಗೆ ಜಗಳ ಕಾಯುವುದೆ ಆಯಿತು. ನಾಲ್ಕನೆಯವಳು ಪೂಜಾ. ಅವಳ ಗಂಡನ ಕೈ ಯಾವಾಗಲೂ ತೂತೆ. ಹಾಗಾಗಿ ಹೆಣ್ಣು ಮಕ್ಕಳ ಗೋಳಿನ ಪತ್ರ ಬಂದಾಗಲೆಲ್ಲಾ ಶ್ರೀನಿವಾಸ ಹೈರಾಣಗುತ್ತಿದ್ದ. ನಳಿನಾಕ್ಷಿಗಂತೂ ಕಣ್ಣೀರು ತಪ್ಪಿದಲ್ಲ. ಕೊನೆಗೆ ಆತ ಹಾಸಿಗೆ ಹಿಡಿದ. ಹಾಸಿಗೆ ಹಿಡಿದ ಎರಡು ವಾರಗಳಲ್ಲಿಯೆ ಆತನ ಸಂಸಾರದ ಗಾಲಿ ಕಳಚಿಕೊಂಡಿತು. ಇನ್ನೆರಡು ವರ್ಷಕ್ಕೆ ನಳಿನಾಕ್ಷಿ ಕೂಡ ಗಂಡನ ಕಡೆಗೆ ನಡೆದದ್ದಾಯಿತು. ಆ ಮನೆಯಲ್ಲಿ ನೆಮ್ಮದಿ ಅಳಿಸಿತು. ಹಿರಿಯ ಮಗ ದೂರವಿದ್ದುದರಿಂದ ಎರಡನೆಯ ಮಗ ಉಳಿದ ಆಸ್ತಿಯ ಜವಾಬ್ದಾರಿಯನ್ನು ಹೊರುವಂತಾಯಿತು.
***
ಹಳೆಯ ನೆನಪುಗಳೆಲ್ಲಾ ಕೆದಕಿ ಆ ರಾತ್ರಿಯಿಡಿ ನಿದ್ದೆ, ವೆಂಕಟಭಟ್ಟನಿಂದ ದೂರವೇ ಉಳಿಯಿತು. ಅಪ್ಪ ಇಷ್ಟು ಕಷ್ಟ ಬಿಟ್ಟು ಮಾಡಿನ ಆಸ್ತಿಯನ್ನು ಮಾರುವ ಮಾತು ಮುಂದೆ ಈ ಮನೆಯಲ್ಲಿ ಬರಬಾರದೆಂಬ ನಿರ್ಧಾರವನ್ನು ತೆಗೆದುಕೊಂಡ. ವನಜಾಕ್ಷಿ ಪಕ್ಕಕ್ಕೆ ಬಂದು ಮಲಗಿದರೂ ಗೋಚರವಾಗಲಿಲ್ಲ. ತದೇಕ ದೃಷ್ಟಿಯಿಂದ ಸೂರನ್ನೇ ದಿಟ್ಟಿಸುತ್ತಾ ಮಲಗಿದ.
"ರೀ" ವನಜಾಕ್ಷಿಗೂ ನಿದ್ದೆ ಸುಳಿಯದೆ ಗಂಡನನ್ನು ಕರೆದಳು.
"ಏನಾಗ್ಬೇಕು?"
"ಅಲ್ಲ... ನೀವಂದ್ರಿ... ನಮ್ಗೆ ಹೆಣ್ಣು ಸಂತಾನ ಅಗೊದು ಬೇಡಾಂತ ನಿಮ್ಮ ತಂದೆ-ತಾಯಿಯ ಶಾಪ ಇದೇಂತ, ಇದು ಸತ್ಯಾನಾ? ಯಾರಾದ್ರೂ ತಮ್ಮ ಸ್ವಂತ ಮಕ್ಕಳಿಗೆ ಆ ರೀತಿ ಶಾಪ ಕೊಡ್ತಾರಾ?"
"ನಾನು ಆಗ್ಲೆ ಹೇಳಿದ್ನಲ್ಲಾ... ನಮ್ಮ ಮನೆ ಹೆಣ್ಣುಗಳ ಕಷ್ಟ ನೋಡಿ ಹಾಗೆ ಅಂದಿರಬಹುದೂಂತ ಹೇಳಿದೆ. ಹಾಗೇ ಇನ್ನೂ ತಿಳಿದುಕೊಳ್ಳುವ ಇಚ್ಛೆ ಇದ್ರೆ ನಾಳೆ ರಾಮ ಜೋಯಿಸರತ್ರ ಹೋಗಿ ಬರೋಣ"
ಗಂಡನ ಮಾತಿನಲ್ಲಿ ವ್ಯಂಗ್ಯವಿದ್ದುದನ್ನು ಗುರುತಿಸಿದ ವನಜಾಕ್ಷಿಗೆ ಮಾತನಾಡಲಾಗದೆ ವಿರುದ್ಧ ದಿಕ್ಕಿಗೆ ಹೊರಳಿ ಮಲಗಿದಳು. ಆದರೆ ಮನಸ್ಸು ತಡೆಯಲಾರದೆ ಮಗ್ಗುಲು ಬದಲಿಸದೆ ಕೇಳಿದಳು.
"ನಮಗೆ ಹೆಣ್ಣು ಮಗು ಆಗೋದಿಲ್ವಾ?"
"ಪದೇ ಪದೇ ಅದನ್ನು ಕೇಳಬೇಡ. ಹೆಣ್ಣು ಮಗು ಆಗದಿದ್ರೆ ದತ್ತು ತೆಗೆದುಕೊಳ್ಳೋಣ. ಈಗ ಸುಮ್ನೆ ಮಲಗು"
"ಹಾಗಂತೀರಾ? ಅದು ನಮ್ಮ ಮಗು ಆಗೊದಿಲ್ವಲ್ಲಾ?"
"ಮನಸ್ಸು ಉದಾರವಾಗಿರಲಿ. 0ಾರದ್ದಾದರೇನು, ಜವಾಬ್ದಾರಿ ನಾವು ತೆಗೆದುಕೊಂಡ ನಂತರ ಅದು ನಮ್ಮದೆ ಮಗು ತಾನೆ?"
"ಹಾಗಾ?"
ಗಂಡನ ಮಾತುಗಳನ್ನು ಮೆಲುಕು ಹಾಕಿಕೊಂಡು ವನಜಾಕ್ಷಿ ಹಾಗೆ ನಿದ್ರೆಗೆ ಜಾರಿದರೆ, ವೆಂಕಟ ಭಟ್ಟರಿಗೂ ಏನೋ ತೃಪ್ತಿಯೆನಿಸಿ ಹಾಗೆ ಕಣ್ಣು ಮುಚ್ಚಿ ನಿದ್ದೆಗೆ ಇಳಿದರು.
****

No comments: